ಹೊರ ಜಿಲ್ಲೆಯವರನ್ನು, ಹೊರ ರಾಜ್ಯದವರನ್ನು ಜನಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿದರೆ ಸಮಸ್ಯೆಯೇನು ಅನ್ನುವುದು ಹಲವು ಸಲ ಬಹಿರಂಗವಾಗಿದೆ. ಆದರೂ ನಮ್ಮ ಜನ ಬುದ್ದಿ ಕಲಿತಿಲ್ಲ.

ಇದೀಗ ದಕ್ಷಿಣ ಭಾರತದಲ್ಲಿ ಭೀಕರ ಮಳೆಯಾಗುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ತತ್ತರಿಸಿ ಹೋಗಿವೆ. ದೇವರನಾಡು ಕೇರಳವನ್ನೂ ದೇವರು ಕೂಡಾ ಕಾಪಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಅದರಲ್ಲೂ ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡಿನಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಗುಡ್ಡ ಕುಸಿತ, ನೆರೆ, ನಿಲ್ಲದ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಇಂತಹ ಸಂದರ್ಭದಲ್ಲಿ ಕ್ಷೇತ್ರಕ್ಕೆ ಭೇಟಿ ಕೊಟ್ಟು ಅಧಿಕಾರಿಗಳ ಜೊತೆಗಿರಬೇಕಾದ ರಾಹುಲ್ ಗಾಂಧಿ ಕ್ಷೇತ್ರದ ಕಡೆಗೆ ಮುಖವೇ ಮಾಡಿಲ್ಲ. ಬದಲಾಗಿ ನೆರೆಯಿಂದ ಬಾಧಿತವಾಗಿರುವ ಪ್ರದೇಶಗಳ ಕುರಿತು ಕಾಳಜಿ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಪ್ರವಾಹದಲ್ಲಿ ಸಿಲುಕಿದವರಿಗೆ ನೆರವು ಒದಗಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ‘ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಅಸ್ಸಾಂ ಹಾಗೂ ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಲಕ್ಷಾಂತರ ಜನ ನೆರೆಯಲ್ಲಿ ಸಿಲುಕಿದ್ದಾರೆ ಇಲ್ಲವೆ ಸ್ಥಳಾಂತರಗೊಂಡಿದ್ದಾರೆ. ಆದ್ದರಿಂದ ನಾನು ಎಲ್ಲಾ ನೆರೆ ಪೀಡಿತ ಪ್ರದೇಶಗಳ ಕಾಂಗ್ರೆಸ್ ಕಾರ್ಯಕರ್ತರು ಸಂಕಷ್ಟದಲ್ಲಿರುವರಿಗೆ ಅಗತ್ಯ ನೆರವು ಒದಗಿಸಬೇಕು. ಪ್ರವಾಹ ಪರಿಸ್ಥಿತಿ ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುವುದಾಗಿ ’ ತಿಳಿಸಿದ್ದಾರೆ.

ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೂ ಮಾತನಾಡಿರುವ ರಾಹುಲ್ ಗಾಂಧಿ ಕೇರಳಕ್ಕೆ ಸಹಾಯ ಹಸ್ತ ಚಾಚುವಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಪ್ರಧಾನಿಯವರು ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕಳೆದ ವರ್ಷದ ಆಗಸ್ಟ್ ನಲ್ಲಿ ಭಾರಿ ಪ್ರವಾಹಕ್ಕೆ ತುತ್ತಾಗಿದ್ದ ಕೇರಳ ವರ್ಷ ಕಳೆಯುವ ಮುನ್ನ ಸಂಕಷ್ಟಕ್ಕೆ ಸಿಲುಕಿದೆ. ಸಂಸದರಾಗಿರುವ ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಭೇಟಿ ಕೊಡುವುದು ಅವರ ಆದ್ಯ ಕರ್ತವ್ಯವಾಗಿತ್ತು.
Discussion about this post