ಬೆಂಗಳೂರು : ದೇಶದಲ್ಲಿ ಏರುತ್ತಿರುವ ಇಂಧನ ಬೆಲೆಯನ್ನು ಖಂಡಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸುತ್ತಿದೆ.
ಇಂಧನ ದರದ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ರಾಜ್ಯ ಕಾಂಗ್ರೆಸ್ ಕರೆ ಕೊಟ್ಟಿದೆ. ಈ ಹಿನ್ನಲೆಯಲ್ಲಿ ಹುಬ್ಬಳ್ಳಿ ಸೇರಿದಂತೆ ಜಿಲ್ಲೆಯ ಕೇಂದ್ರ ಸ್ಥಾನಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ಹುಬ್ಬಳ್ಳಿಯಲ್ಲೂ ಪ್ರತಿಭಟನೆ ನಡೆದಿದ್ದು, ನಗರದ ಕಾಮತ್ ಹೋಟೆಲ್ ನಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಚನ್ನಮ್ಮ ವೃತ್ತಕ್ಕೆ ಬಂದ ಪ್ರತಿಭಟನಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಮಿರ್ಜಾನಕರ್ ಬಂಕ್ ಗೆ ತೆರೆಳಿ ತೈಲ ಬೆಲೆ ಇಳಿಕೆಗೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಮುಖಂಡ ಅಲ್ತಾಫ್ ಹಳ್ಳೂರು, ಲಾಕ್ ಡೌನ್ ನಡುವೆಯೂ ತೈಲ ಬೆಲೆ ಏರಿಕೆಯಾಗುತ್ತಿರುವುದು ದುರಂತ. ಇದರಿಂದ ಜನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ದಿನಬಳಕೆಯ ವಸ್ತುಗಳ ಏರಿಕೆ ಮತ್ತೊಂದು ಕಡೆ ಇಂಧನ ಬೆಲೆ ಏರಿಕೆ. ಹೀಗಾದ್ರೆ ಜನ ಸಾಮಾನ್ಯರ ಬದುಕು ಬೀದಿಗೆ ಗ್ಯಾರಂಟಿ ಎಂದು ಆತಂಕ ವ್ಯಕ್ತಪಡಿಸಿದರು,
ರಾಜ್ಯ ವಿದ್ಯುತ್ ಬೆಲೆ ಏರಿಸಿದೆ, ಕೇಂದ್ರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಿದೆ. ಇದು ಗಾಯದ ಮೇಲೆ ಬರೆ ಎಳೆದಂತೆ. ಇವರಿಗೆ ಜನ ಸಾಮಾನ್ಯರ ಸಂಕಷ್ಟ ಅರಿವಾಗುತ್ತಿಲ್ಲ. ಜನರ ಕಾಳಜಿ ಇಲ್ಲದ ಪ್ರಧಾನಿ ಇದ್ದರೆಷ್ಟು ಬಿಟ್ಟರೆಷ್ಟು, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೊಡಲಿ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
Discussion about this post