ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಅಬ್ಬರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿಂದಿಗೆ ಹೋಲಿಸಿದರೆ, ಶೀಘ್ರವಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ಪ್ರಾರಂಭದಲ್ಲೇ ಕಡಿವಾಣ ಹಾಕಲು ಮುಂದಾಗಿದೆ.
ಈ ಸಂಬಂಧ ಇಂದು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರು ಹಾಗೂ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ವಿಕೇಂಡ್ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಇಂದಿನಿಂದಲೇ ಈ ಆದೇಶ ಜಾರಿಗೆ ಬರಲಿದ್ದು, ಶುಕ್ರವಾರ ಸಂಜೆಯಿಂದ ಸೋಮವಾರ 5 ಗಂಟೆ ತನಕ ಈ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
ವಿಕೇಂಡ್ ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಗೊಳಿಸಲಾಗಿದ್ದು ಕೆಲವೇ ಕ್ಷಣಗಳಲ್ಲಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ನು ವಿಕೇಂಡ್ ಕರ್ಫ್ಯೂ ಸಂದರ್ಭದಲ್ಲಿ ಮೆಡಿಕಲ್, ಹಾಲು ಪೂರೈಕೆ ಸೇರಿದಂತೆ ಕೆಲ ಸೇವೆಗಳಿಗೆ ಎಂದಿನಂತೆ ವಿನಾಯತಿ ಸಿಗಲಿದೆ.
ಬೀದರ್, ಕಲಬುರಗಿ, ದಕ್ಷಿಣ ಕನ್ನಡ, ಕೊಡಗು, ವಿಜಯಪುರ, ಬೆಳಗಾವಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಮಾತ್ರ ಈ ಆದೇಶ ಅನ್ವಯವಾಗುತ್ತದೆ. ಈಗಾಗಲೇ ಈ ಎಂಟು ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಶೇ5ನ್ನು ತಲುಪಿದೆ. ಅಷ್ಟು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ ಹಾಗೂ ಮಂಗಳೂರು ತಾಲೂಕುಗಳಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಜೊತೆಗೆ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಕೇರಳ ಮತ್ತು ಮಹರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಆದೇಶ ಜಾರಿಯಲ್ಲಿರುತ್ತದೆ.
Discussion about this post